ಅಡಿಗ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಅಡಿಗ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುರುವಾರ, ಜನವರಿ 13, 2011

ಮೋಹನ ಮುರಲಿ

ಯಾವ ಮೋಹನಮುರಲಿ ಕರೆಯಿತು ದೂರ ತೀರಕೆ ನಿನ್ನನು?
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು?

ಹೂವು, ಹಾಸಿಗೆ, ಚಂದ್ರ, ಚಂದನ, ಬಾಹುಬಂಧನ ಚುಂಬನ ;
ಬಯಕೆ ತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ ;

ಒಲಿದ ಮಿದುವೆದೆ, ರಕ್ತಮಾಂಸದ ಬಿಸಿದುಸೋಂಕಿನ ಪಂಜರ ;
ಇಷ್ಟೆ ಸಾಕೆಂದಿದ್ದೆಯಲ್ಲೋ! ಇಂದು ಏನಿದು ಬೇಸರ?

ಏನಿದೇನಿದು ಹೊರಳುಗಣ್ಣಿನ ತೇಲುನೋಟದ ಸೂಚನೆ?
ಯಾವ ಸುಮಧುರ ಯಾತನೆ? ಯಾವ ದಿವ್ಯದ ಯಾಚನೆ?

ಮರದೊಳಡಗಿದ ಬೆಂಕಿಯಂತೆ ಎಲ್ಲೊ ಮಲಗಿದೆ ಬೇಸರ ;
ಏನೊ ತೀಡಲು ಏನೊ ತಾಗಲು ಹೊತ್ತಿ ಉರಿವುದು ಕಾತರ.

ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ,
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ?

ವಿವಶವಾಯಿತು ಪ್ರಾಣ; ಹಾ! ಪರವಶವು ನಿನ್ನೀ ಚೇತನ ;
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ?

ಯಾವ ಮೋಹನಮುರಲಿ ಕರೆಯಿತು ಇದ್ದಕಿದ್ದೊಲೆ ನಿನ್ನನು?
ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು?

                                                             - ಎಂ. ಗೋಪಾಲಕೃಷ್ಣ ಅಡಿಗ

ಬುಧವಾರ, ಡಿಸೆಂಬರ್ 1, 2010

ಎದೆಯು ಮರಳಿ ತೊಳಲುತಿದೆ


ಎದೆಯು ಮರಳಿ ತೊಳಲುತಿದೆ
ದೊರೆಯದುದನೆ ಹುಡುಕುತಿದೆ ;
ಅತ್ತ ಇತ್ತ ದಿಕ್ಕುಗೆಟ್ಟು
ಬಳ್ಳಿ ಬಾಳು ಚಾಚುತಿದೆ
ತನ್ನ ಕುಡಿಯನು.

ಸಿಗಲಾರದ ಆಸರಕೆ
ಕಾದ ಕಾವ ಬೇಸರಕೆ
ಮಿಡುಕಿ ದುಡಿಯಲೆಳಸುತಿದೆ
ತನ್ನ ಗುಡಿಯನು.

ಅದಕು ಇದಕು ಅಂಗಲಾಚಿ
ತನ್ನೊಲವಿಗೆ ತಾನೆ ನಾಚಿ
ದಡವ ಮುಟ್ಟಿ ಮುಟ್ಟದೊಲು
ಹಿಂದೆಗೆಯುವ ವೀಚಿ ವೀಚಿ
ಮುರುಟುತಲಿವೆ ಮನದಲಿ!

ನೀರದಗಳ ದೂರ ತೀರ
ಕರೆಯುತಲಿದೆ ಎದೆಯ ನೀರ,
ಮೀರುತಲಿದೆ ಹೃದಯ ಭಾರ
ತಾಳಲೆಂದು ನಾ?

ಯಾವ ಬಲವು ಯಾವ ಒಲವು
ಕಾಯಬೇಕು ಅದರ ಹೊಳವು  
ಕಾಣದೆ ದಳ್ಳಿಸಲು ಮನವು
ಬಾಳಲೆಂತು ನಾ?

                                            - ಎಂ. ಗೋಪಾಲಕೃಷ್ಣ ಅಡಿಗ
                                              ' ಕಟ್ಟುವೆವು ನಾವು '

ಮಂಗಳವಾರ, ನವೆಂಬರ್ 30, 2010

ಗೆಳೆತನ


ಕೊನೆಗಾಣದೆ ಬಿಗಿಮಾಣದೆ ತಳುವಬೇಕು - ಗೆಳೆತನ.
ತಳುವಬೇಕು - ನನಗೆ ನಿನಗೆ ಬರುವ ತನಕ ಕೊನೆದಿನ.
ತಳಿರ ತಳಿರ ತಳ್ಕೆಯಂತೆ ಮೃದುಲ ಮಧುರ ಜೀವನ.
ಮಲರ ಮಲರ ಮಾಳ್ಕೆಯಂತೆ ಮನದ ಮನದ ಮಿದುತನ.

ಒಂದೆ ಗಾನತಾನ ನನ್ನ ನಿನ್ನ ಹೃದಯ ಮಿಲನಕೆ.
ಒಂದೆ ಅಚ್ಚುಮೆಚ್ಚು ನಮ್ಮ ಭಾವ ಜೀವ ವಲನಕೆ.
ಒಂದೆ ಅಂಕೆಸಂಖ್ಯೆ ನಮ್ಮ ಸೌಖ್ಯದ ಸಂಕಲನಕೆ.
ಒಂದೆ ಗಮ್ಯಗತಿಯು ನಮ್ಮ ಜೀವನ ಸಂಚಲನಕೆ.

ಗುಡುಗು ಮಿಂಚಿನಂತೆ ಒಂದುಗೂಡಿ ಮೊಳಗಿ ಬೆಳಗುವಾ!
ಕಡಲುತಡಿಗಳಂತೆ ಒಂದನೊಂದು ತಡೆದು ತಡೆಹುವಾ
ಗಾಳಿ ಕಿಚ್ಚಿನಂತೆ ಕೂಡಿಯಾಡಿ ತಿರೆಯ ಬೆಳಗುವಾ!
ಬಾನುಬುವಿಗಳಂತೆ ಒಂದಕೊಂದು ಸೀಮೆ ಎನಿಸುವ!

ಮುಗಿಲ ಯುಗಲದಂತೆ ಬಂದು ಸೇರಿ ಸಾರಿ ಅಗಲದೆ,
ಹಗಲ ಮೊಗದ, ರಾಗದಂತೆ ಸಂಜೆಯೊಡನೆ ಜಗುಳದೆ
ಗಾಳಿಗೈಯ ತರಗಲಂತೆ ಕಲೆತು ತಿರುಗಿ ಕದಲದೆ
ಬಾಳಬೇಕು, ಬೆಳೆಯಬೇಕು ಸಖ್ಯ ಕ್ಷಣಿಕವೆನಿಸದೆ.

ನಿನ್ನೊಳೊಂದೆ ಭಿಕ್ಷೆ ಗೆಳತಿ, ಅದುವೆ ಹೃದಯದಾನವು!
ಜನ್ಮಮೃತ್ಯುಗಳಲು ನಗುವ ಪ್ರೇಮದಮೃತ ಪಾನವು.
ದುಃಖ ಸುಖಗಳನ್ನು ಮಿಗುವ ತ್ಯಾಗದ ಮರಗಾನವು
ಹೊಂದುವಳಿಕೆ ತವದ ಸೌಖ್ಯಯೋಗದ ಭ್ರಯಾನವು.

ನನ್ನ ನಿನ್ನ ಜೀವ, ಗೆಳತಿ, ಒಂದಕೊಂದು ಪೂರಕ,
ನನ್ನ ನಿನ್ನ ಭಾವ ಒಂದಕೊಂದು ಕಾಂತಿದಾಯಕ.
ಒಂದು ಹೃದಯ ಧನುವು, ಮೆಣದೊಂದು ನಿಶಿತ ಸಾಯಕ
ಒಂದು ಗಂಗೆ, ಒಂದು ಯಮುನೆ - ಏಕ ಮಾರ್ಗವಾಹಕ.

ಹೀಗೆ ಬಾಳ್ವೆನೆಂಬೆ ಬಯಕೆಯೊಂದದೇಕೆ ಹಿರಿದಿದೆ?
ಯೋಗವಿದು ನಿರರ್ಥ, ನಿನ್ನ ಹೃದಯ ಯೋಗ ಬರದಿರೆ.
ಬರಿಯ ಕೆಂಡ ಗಳಿಗೆಯೊಳಗೆ ನಂದಿ ಕಾಂತಿಯುಳಿಯದೆ?
ನೆರವು ಬರಲು ಗಾಳಿಯಿಂದ ಅದರ ಬಾಳು ಬೆಳಗದೆ?

                                                            - ಎಂ. ಗೋಪಾಲಕೃಷ್ಣ ಅಡಿಗ
                                                              ' ಕಟ್ಟುವೆವು ನಾವು '